top of page

ಆರ್‌ಎಸ್‌ಎಸ್‌ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ: ರಾಹುಲ್‌ ಗಾಂಧಿ ಗಂಭೀರ ಆರೋಪ!

Writer: Ananthamurthy m Hegde
Ananthamurthy m Hegde
Mar 25, 2025
1 min read

ಹೊಸದಿಲ್ಲಿ: "ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಭಾರತದ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಹುನ್ನಾರ ನಡೆಸಿದೆ" ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ಇಂಡಿಯಾ ಬಣದ ವಿದ್ಯಾರ್ಥಿ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, "ಆರ್‌ಎಸ್‌ಎಸ್‌ ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನಿಯಂತ್ರಿಸುತ್ತಿದೆ" ಎಂದು ಟೀಕಿಸಿದರು.

"ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸಂಪನ್ಮೂಲಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮತ್ತು ದೇಶದ ಶಿಕ್ಷಣ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ಗೆ ಹಸ್ತಾಂತರಿಸುತ್ತಿದೆ. ಆರ್‌ಎಸ್‌ಎಸ್‌ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ನಾಶಮಾಡಲು ಹೊರಟಿದ್ದು, ಇಂಡಿಯಾ ಮೈತ್ರಿಕೂಟ ಇದಕ್ಕೆ ಅವಕಾಶ ನೀಡುವುದಿಲ್ಲ" ಎಂದು ರಾಹುಲ್‌ ಗಾಂಧಿ ಗುಡುಗಿದರು.


"ಶಿಕ್ಷಣ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಆರ್‌ಎಸ್‌ಎಸ್‌ ಹುನ್ನಾರದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಡಬೇಕು. ಶಿಕ್ಷಣ ವ್ಯವಸ್ಥೆಯನ್ನು ಆರ್‌ಎಸ್‌ಎಸ್‌ ನಾಶ ಮಾಡಲು ಬಯಸಿದ್ದು, ಇದು ದೇಶದ ಭವಿಷ್ಯಕ್ಕೆ ಅತ್ಯಂತ ಅಪಾಯಕಾರಿ.." ಎದು ಲೋಕಸಭೆ ಪ್ರತಿಪಕ್ಷ ನಾಯಕ ತೀವ್ರ ವಾಗ್ದಾಳಿ ನಡೆಸಿದರು.

"ಭಾರತೀಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಆರ್‌ಎಸ್‌ಎಸ್ ನಿಯಂತ್ರಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳನ್ನೂ ಕೂಡ ಆರ್‌ಎಸ್‌ಎಸ್ ಶಿಫಾರಸ್ಸಿನ ಮೇರೆಗೆ ನೇಮಿಸುವ ಹುನ್ನಾರ ನಡೆದಿದೆ. ಇದನ್ನು ತಡೆಯಲು ನಾವೆಲ್ಲಾ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು.." ಎಂದು ರಾಹುಲ್‌ ಗಾಂಧಿ ಕರೆ ನೀಡಿದರು.

"ನಿರುದ್ಯೋಗ, ಹಣದುಬ್ಬರ ಮತ್ತು ಶಿಕ್ಷಣ ವ್ಯವಸ್ಥೆಯ ಬಗ್ಗೆ ಪ್ರಧಾನಿ ಮೋದಿ ಒಂದು ಮಾತನ್ನೂ ಆಡುವುದಿಲ್ಲ. ದೇಶದ ಸಂಪನ್ಮೂಲಗಳನ್ನು ಅದಾನಿ ಮತ್ತು ಅಂಬಾನಿಗೆ ಹಸ್ತಾಂತರಿಸುವುದು ಮತ್ತು ದೇಶದ ಶಿಕ್ಷಣ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ಗೆ ಹಸ್ತಾಂತರಿಸುವುದು ಪ್ರಧಾನಿ ಮೋದಿ ಅವರ ಆಡಳಿತ ಮಾದರಿ.." ಎಂದು ರಾಹುಲ್‌ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

"ನೀವು ಇಂಡಿಯಾ ಬಣದ ವಿದ್ಯಾರ್ಥಿಗಳು, ನಮ್ಮ ಸಿದ್ಧಾಂತಗಳು ಮತ್ತು ನೀತಿಗಳಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ದೇಶದ ಶಿಕ್ಷಣ ವ್ಯವಸ್ಥೆಯ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಒಟ್ಟಾಗಿ ಈ ಹೋರಾಟವನ್ನು ಮುಂದುವರೆಸುತ್ತೇವೆ ಮತ್ತು ಆರ್‌ಎಸ್‌ಎಸ್ ಅನ್ನು ಹಿಮ್ಮೆಟ್ಟಿಸುತ್ತೇವೆ.." ಎಂದು ರಾಹುಲ್‌ ಗಾಂಧಿ ಘೋಷಿಸಿದರು.

"ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆಯನ್ನು ದೇಶದ ಮೇಲೆ ಹೇರುವ ಆರ್‌ಎಸ್‌ಎಸ್‌ನ ಕಾರ್ಯಸೂಚಿಯ ಭಾಗವಾಗಿದೆ ಎನ್‌ಇಪಿ ಅನುಷ್ಠಾನ ಈ ದೇಶದ ಶೈಕ್ಷಣಿಕ ಮೌಲ್ಯಗಳ ಮೇಲಿನ ದಾಳಿಯಾಗಲಿದೆ. ಶಿಕ್ಷಣದಲ್ಲಿ ಖಾಸಗೀಕರಣ, ಕೋಮುವಾದೀಕರಣ ಜಾರಿ ಮಾಡುವುದು ಆರ್‌ಎಸ್‌ಎಸ್‌ನ ಹುನ್ನಾರವಾಗಿದ್ದು, ಎನ್‌ಇಪಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ.." ಎಂದು ಕಾಂಗ್ರೆಸ್‌ ನಾಯಕ ಗುಡುಗಿದರು.

ಪ್ರತಿಭಟನೆಯಲ್ಲಿ ಇಂಡಿಯಾ ಮೈತ್ರಿಕೂಟದ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ವಿರುದ್ಧದ ಜಂಟಿ ಹೋರಾಟವನ್ನು ಮುಂದುವರೆಸುವ ಪ್ರತಿಜ್ಞೆ ಮಾಡಿದವು.

Comments


Top Stories

1/322
bottom of page