top of page

ಈಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆಶಿ : ಸ್ವಪಕ್ಷೀಯರಿಂದಲೇ ಟೀಕೆ

  • Writer: Ananthamurthy m Hegde
    Ananthamurthy m Hegde
  • Feb 27
  • 2 min read

ಬೆಂಗಳೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಈಶಾ ಫೌಂಡೇಷನ್ ಜಗ್ಗಿ ವಾಸುದೇವ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿರುವುದು ಕಾಂಗ್ರೆಸ್‌ನಲ್ಲೇ ವಿರೋಧಕ್ಕೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯಾರು ಎಂದು ಸಂದರ್ಶನವೊಂದರಲ್ಲಿ ವಾಸುದೇವ್ ಪ್ರಶ್ನೆ ಮಾಡಿದ್ದೇ ಕೈ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಈ ಸಂದರ್ಶನದ ವಿಡಿಯೋ ಅಂಶಗಳೂ ವೈರಲ್ ಆಗುತ್ತಿವೆ. ಹೀಗಿರುವಾಗ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಏನು ಸಂದೇಶ ನೀಡಲಿದೆ ಎಂಬುವುದು ಪ್ರಶ್ನೆಯಾಗಿದೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಪಾಲ್ಗೊಂಡಿದ್ದರು. ಡಿ. ಕೆ ಶಿವಕುಮಾರ್ ಅವರು ಸದ್ಗುರು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು. ಶಿವಕುಮಾರ್ ಅವರ ಪತ್ನಿ ಉಷಾ, ನಾದಿನಿ ಹಾಗೂ ಕುಣಿಗಲ್ ಶಾಸಕ ಡಾ ರಂಗನಾಥ್ ಅವರ ಪತ್ನಿ ಡಾ. ಸುಮಾ ಮತ್ತಿತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಡಿಕೆಶಿ ಜೊತೆಗೆ ಕಾಣಿಸಿಕೊಂಡಿರುವ ಫೋಟೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆಕ್ಷೇಪ ಏನು?

ಈಶಾ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗಿದ್ದಕ್ಕೆ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಡಿಕೆಶಿ ನಡೆಯನ್ನು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಅಣಕಿಸಿದ ವ್ಯಕ್ತಿಯ ಕಾರ್ಯಕ್ರಮದಲ್ಲಿ ಭಾಗಿಯಾದರೆ ಅದು ತಪ್ಪು ಸಂದೇಶಕ್ಕೆ ಎಡೆಮಾಡಿಕೊಡುತ್ತದೆ ಎಂದು ಮೋಹನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಏನಿದು ಸದ್ಗುರು ವಿವಾದ?

ಆನ್‌ಲೈನ್‌ನಲ್ಲಿರುವ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸದ್ಗುರು ಜಗ್ಗಿ ವಾಸುದೇವ್ ನಿರೂಪಕರ ಪ್ರಶ್ನೆಗೆ ಉತ್ತರಿಸಿ "ನನಗೆ ರಾಹುಲ್ ಗಾಂಧಿ ಯಾರು ಎಂಬುದು ನಿಜಕ್ಕೂ ಗೊತ್ತಿಲ್ಲ, ಏಕೆಂದರೆ ಅವರು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂಬುದು ನಮಗೆ ಸ್ಪಷ್ಟವಿಲ್ಲ. ಯಾರಾದರೂ ರಾಜಕೀಯ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಬಯಸಿದರೆ, ಆ ವ್ಯಕ್ತಿ ಏನನ್ನು ಪ್ರತಿನಿಧಿಸುತ್ತಾರೆ ಎಂಬುದು ಜನತೆಗೆ ಸ್ಪಷ್ಟವಾಗಿರಬೇಕು. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ, ನರೇಂದ್ರ ಮೋದಿ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಏನನ್ನು ಪ್ರತಿನಿಧಿಸುತ್ತಾರೆ? ಕನಿಷ್ಠ ನನಗೆ ಇದು ಸ್ಪಷ್ಟವಾಗಿಲ್ಲ" ಎಂದು ಹೇಳಿದ್ದಾರೆ.

ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

ಕುಂಭಮೇಳದಲ್ಲಿ ಭಾಗಿ ಹಾಗೂ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಗಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಡಿಕೆಶಿ “ಸದ್ಗುರು ಅವರು ನನ್ನ ಮನೆಗೆ ಬಂದು ಈಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದರು. ಅವರು ನಮ್ಮ ಮೈಸೂರಿನವರು. ಅವರ ಜ್ಞಾನವನ್ನು ನಾನು ಮೆಚ್ಚುತ್ತೇನೆ. ಕಳೆದ ವರ್ಷ ನನ್ನ ಮಗಳು ಆ ಕಾರ್ಯಕ್ರಮಕ್ಕೆ ಹೋಗಿದ್ದಳು. ಈ ಬಾರಿ ಅವರು ನಮ್ಮ ಮನೆಗೆ ಬಂದು ನನ್ನ ಹಾಗೂ ನನ್ನ ಕುಟುಂಬಕ್ಕೆ ಆಹ್ವಾನ ನೀಡಿದ್ದಾರೆ. ಈಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಇಷ್ಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಚರ್ಚೆಗೆ ಗ್ರಾಸವಾಗುತ್ತಿರುವ ಡಿಕೆಶಿ ನಡೆ:

ಡಿಸಿಎಂ ಡಿಕೆ ಶಿವಕುಮಾರ್ ಈ ನಡೆ ಚರ್ಚೆಗೆ ಗ್ರಾಸವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಇದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಡಿಕೆಶಿ ಕಾಂಗ್ರೆಸ್‌ನಲ್ಲಿದ್ದರು ಕಾಂಗ್ರೆಸ್ ಸಿದ್ದಾಂತದಲ್ಲಿ ಇಲ್ಲ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಡುವೆ ಇತ್ತೀಚೆಗೆ ಡಿಕೆಶಿ ಕುಂಭಮೇಳದಲ್ಲೂ ಭಾಗಿಯಾಗಿದ್ದರು. ಕುಂಭಮೇಳದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಿನ್ನ ನಿಲುವು ವ್ಯಕ್ತಪಡಿಸಿದರೆ ಅದೇ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗುವ ಮೂಲಕ ತಮ್ಮ ನಿಲುವು ಭಿನ್ನ ಎಂದು ಸ್ಪಷ್ಟಪಡಿಸಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ಡಿಕೆಶಿ ನಡೆಗೆ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲದೆ ಕಾಂಗ್ರೆಸ್ ಹಿತೈಷಿಗಳ ನಡುವೆಯೂ ಆಕ್ಷೇಪಕ್ಕೆ ಕಾರಣವಾಗುತ್ತಿದೆ.

留言


Top Stories

bottom of page