ಕಿಡಿಗೇಡಿಗಳ ಹುಚ್ಚಾಟದಿಂದ ಜನರಿಗೆ ಶಿಕ್ಷೆ

ಚಿಕ್ಕೋಡಿ: ಕನ್ನಡ ಮಾತನಾಡಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಈ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆಯುತ್ತಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಕನ್ನಡ-ಮರಾಠಿ ವಿವಾದಕ್ಕೂ ಕಾರಣವಾಗಿದೆ. ಇತ್ತ ಕರ್ನಾಟಕದಲ್ಲಿ ಮಹಾರಾಷ್ಟ್ರದ ಬಸ್ ತಡೆದು, ಅತ್ತ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗೆ ತಡೆಯೊಡ್ಡಲಾಗಿದೆ. ಇನ್ನು ಕೊಲ್ಹಾಪುರದಲ್ಲಿ ಶಿವಸೇನೆ ಭಾರೀ ಪ್ರತಿಭಟನೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ - ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಸರ್ಕಾರಿ ಬಸ್ ಸಂಚಾರ ನಿನ್ನೆಯಿಂದ ಬಂದ್ ಆಗಿದ್ದು, ಇಂದು ಕೂಡ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರದಲ್ಲಿ ಶಿವಸೇನೆ ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ. ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಈ ಮಾರ್ಗದಲ್ಲಿ 120 ಬಸ್ಗಳು ಸಂಚರಿಸುತ್ತಿದ್ದವು. ಕರ್ನಾಟಕದಿಂದ ಕೊಲ್ಲಾಪುರ, ಇಂಚಲಕರಂಜಿ ಸೇರಿದಂತೆ ಗಡಿ ಗ್ರಾಮಗಳಿಗೆ ತೆರಳುತ್ತಿದ್ದ 120 ಬಸ್ಗಳ ಸಂಚಾರವನ್ನು ಸಾರಿಗೆ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆ ಎದುರಾಗಿದೆ.










Comments