top of page

ಕರ್ನಾಟಕಕ್ಕೂ ಬೆಲೆ ಕೊರತೆ ಪಾವತಿ ಯೋಜನೆ ವಿಸ್ತರಿಸಬೇಕು: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

Writer: Ananthamurthy m Hegde
Ananthamurthy m Hegde
Mar 11, 2025
1 min read

ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಪತ್ರ ಬರೆದಿದ್ದಾರೆ.



ರಾಜ್ಯದ ಮಾರುಕಟ್ಟೆಯಲ್ಲಿ ಒಣಮೆಣಸಿನಕಾಯಿ ಬೆಲೆ ತೀವ್ರ ಕುಸಿತ ಕಂಡಿದ್ದು, ಲಕ್ಷಾಂತರ ಒಣಮೆಣಸು ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಬೆಳೆಯುವ ಒಣಮೆಣಸಿನಕಾಯಿಗೆ ಬೆಲೆ ಕೊರತೆ ಪಾವತಿ ಯೋಜನೆಯನ್ನು ಮಂಜೂರು ಮಾಡಿದೆ. ಅಲ್ಲಿ ಪ್ರತಿ ಕ್ವಿಂಟಾಲ್ ಒಣಮೆಣಸಿನಕಾಯಿಗೆ 11,781 ರೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಇದು ಸ್ವಾಗತಾರ್ಹ ನಡೆಯಾಗಿದ್ದು, ರಾಜ್ಯದ ಒಣಮೆಣಸಿನಕಾಯಿ ರೈತರ ಸಂಕಷ್ಟಕ್ಕೂ ಕೇಂದ್ರ ಸ್ಪಂದಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಒಣಮೆಣಸಿನಕಾಯಿ ಉತ್ಪಾದನೆ ವೆಚ್ಚ ಪ್ರತಿ ಕ್ವಿಂಟಾಲ್​ಗೆ 12,675 ರೂ. ಇರುವುದಾಗಿ ಕರ್ನಾಟಕ ಕೃಷಿ ಬೆಲೆ ಆಯೋಗ ನಿಗದಿಪಡಿಸಿದೆ. ಆದರೆ, ರೈತರು ಪ್ರತಿ ಕ್ವಿಂಟಾಲ್​ಗೆ 8,300 ರೂ.ಗೆ ಒಣಮೆಣಸಿನಕಾಯಿ ಮಾರಾಟ ಮಾಡುತ್ತಿದ್ದಾರೆ. ಇದು ರೈತರಿಗೆ ದೊಡ್ಡ ಆರ್ಥಿಕ ಹೊಡೆತ ನೀಡಿದೆ ಎಂದು ತಿಳಿಸಿದ್ದಾರೆ.

ಬರಪೀಡಿತ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅತಿ ಹೆಚ್ಚು ಒಣಮೆಣಸಿನಕಾಯಿ ಬೆಳೆಯಲಾಗುತ್ತದೆ. ಬೆಲೆ ಕುಸಿತದಿಂದ ಅವರು ಸಾಲದ ಸುಳಿಗೆ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶಿಸಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಜಾರಿಗೊಳಿಸುವುದು ಅನಿವಾರ್ಯ. ಇದರ ಜೊತೆಗೆ, ರೈತರಿಗೆ ಉತ್ತಮ ಸೇವೆ ಸಲ್ಲಿಸಲು ಅಸ್ತಿತ್ವದಲ್ಲಿರುವ ಯೋಜನೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದ ಒಣಮೆಣಸಿನಕಾಯಿಗೆ ಪ್ರತಿ ಕ್ವಿಂಟಾಲ್​ಗೆ 13,500 ರೂ. ಎಂಐಪಿ ನಿಗದಿ ಮಾಡುವಂತೆ ಮನವಿ ಮಾಡಿದ್ದಾರೆ.

Comments


Top Stories

1/322
bottom of page