ಡಿಕೆಶಿ ಹೇಳಿಕೆಗೆ ನಟಿ ರಮ್ಯಾ ಅಚ್ಚರಿಯ ಪ್ರತಿಕ್ರಿಯೆ
- Ananthamurthy m Hegde
- Mar 3
- 2 min read
ಹೊಸಪೇಟೆ (ಹಂಪಿ): ನಟ, ನಟಿಯರ ನಟ್ಟು ಬೋಲ್ಟ್ ಟೈಟ್ ಮಾಡುವೆ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ನಟಿ ರಮ್ಯಾ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಗೆ ಸಹಮತ ಸೂಚಿಸಿದ್ದಾರೆ.
ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಂಪಿಗೆ ಭಾನುವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಲಾವಿದರ ಬಗ್ಗೆ ಹೇಳಿರುವುದರಲ್ಲಿ ತಪ್ಪೇನಿಲ್ಲ,'' ಎಂದು ನಟಿ ರಮ್ಯಾ ಹೇಳಿದರು.

'' ನೀರಿನ ವಿಚಾರ ಬಂದಾಗ ಕಲಾವಿದರು ಎಲ್ಲರೂ ಬೆಂಬಲಿಸಬೇಕು. ಡಿಕೆ ಶಿವಕುಮಾರ್ ಅವರು ಅದನ್ನೇ ಹೇಳಿದ್ದು. ಅದಕ್ಕೆ ನನ್ನ ಸಹಮತವಿದೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು. ಡಾ.ರಾಜ್ಕುಮಾರ್ ಅವರೂ ನೆಲ, ಜಲ ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ,'' ಎಂದು ಸ್ಮರಿಸಿದರು.
ಡಿಕೆ ಶಿವಕುಮಾರ್ ಏನಂದಿದ್ದರು?
16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ನಟಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಡಿಕೆ ಶಿವಕುಮಾರ್ ಬೇಸರಗೊಂಡಿದ್ದರು. "ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟು ಟೈಟ್ ಮಾಡಬೇಕು ಅಂತ ನನಗೆ ಗೊತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದರು.
"ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ. ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು "ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದರು.
"ಅಸೋಸಿಯೇಷನ್ ನಿಂದ ಕೆಲವರು ಮಾತ್ರ ಬಂದಿದ್ದರು. ಕಲಾವಿದರ ಪೈಕಿ, ಸಾಧು ಕೋಕಿಲ ಹಾಗೂ ದುನಿಯಾ ವಿಜಿ ಅವರನ್ನು ಬಿಟ್ಟರೆ ಮತ್ಯಾರು ಭಾಗವಹಿಸಲಿಲ್ಲ. ಕೆಲವರು ನಟರನ್ನು ಬಳಸಿಕೊಂಡು ನಂತರ ಬಿಸಾಡುತ್ತಾರೆ. ನಾವು ಆ ರೀತಿ ಮಾಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಧು ಕೋಕಿಲ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಯಾರು ನಮಗೆ ಸಹಾಯ ಮಾಡುತ್ತಾರೋ ಅವರನ್ನು ಗುರುತಿಸಬೇಕು. ನಮಗೆ ಎಲ್ಲ ರಂಗದಲ್ಲಿಯೂ ಯಾರ್ಯಾರ ನಾಡಿ ಮಿಡಿತ ಏನಿದೆ ಎಂಬುದರ ಅರಿವಿದೆ. ಕಷ್ಟ ಕಾಲದಲ್ಲಿ ಆಗದಿದ್ದ ಮೇಲೆ ಏನು ಪ್ರಯೋಜನ" ಎಂದು ಪ್ರಶ್ನಿಸಿದ್ದರು.
ನಟ್ಟು ಬೋಲ್ಟ್ ಟೈಟ್ ಮಾಡಬೇಕು:
"ಮುಂದಿನ ದಿನಗಳಲ್ಲಿಯಾದರೂ ಇಂತಹ ಕಾರ್ಯಕ್ರಮಗಳಿಗೆ ಚಿತ್ರರಂಗದ ಪ್ರಮುಖರು ಆಗಮಿಸಬೇಕು. ನಿಮ್ಮ ಕಾರ್ಯಕ್ರಮಕ್ಕೆ ನೀವೇ ಬರದಿದ್ದರೆ ಹೇಗೆ? ಇದನ್ನು ಎಚ್ಚರಿಕೆಯಂತಾದರೂ ಪರಿಗಣಿಸಿ ಅಥವಾ ಮನವಿ ಎಂದಾದರೂ ಪರಿಗಣಿಸಿ. ಈ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ. ಸರ್ಕಾರ ಅನುಮತಿ ನೀಡದೆ ಇದ್ದರೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶವೇ ಸಿಗುವುದಿಲ್ಲ. ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನಮಗೆ ಗೊತ್ತಿದೆ" ಎಂದು ತಿಳಿಸಿದ್ದರು.















Comments