ನಾವು 1 ರೂಪಾಯಿ ಕೊಟ್ರೆ 15 ಪೈಸೆ ಮಾತ್ರ ವಾಪಸ್ ಬರ್ತಿದೆ

16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪನಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 16ನೇ ಹಣಕಾಸು ಆಯೋಗದ ಜೊತೆಗಿನ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.5 ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180ರ ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು, ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಪ್ರತಿ ವರ್ಷ 4.5 ಲಕ್ಷ ಕೋಟಿ ತೆರಿಗೆ ನೀಡುತ್ತದೆ. ಒಂದು ರೂ.ಗಳು ನೀಡಿದರೆ 15 ಪೈಸೆ ನಮಗೆ ವಾಪಸ್ಸು ಬರುತ್ತದೆ ಎಂದ ಸಿಎಂ ಸಿದ್ದರಾಮಯ್ಯ, ಈ ಅನ್ಯಾಯ 16ನೇ ಹಣಕಾಸು ಆಯೋಗದಲ್ಲಿ ಆಗಬಾರದು. 14ನೇ ಹಣಕಾಸು ಆಯೋಗದಲ್ಲಿ ನಮ್ಮ ತೆರಿಗೆ ಪಾಲು 4.713% ಕ್ಕೆ ಮತ್ತು 15 ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು 3.647%ಕ್ಕೆ ಇಳಿಕೆ ಮಾಡಿದ್ದರಿಂದ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ಒಟ್ಟಾರೆ 23% ರಷ್ಟು ಇಳಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ ಎಂದರು.










Comments