top of page

ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಸಭೆ ಅಸ್ತು

Writer: Ananthamurthy m Hegde
Ananthamurthy m Hegde
Nov 6, 2024
1 min read


ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಉನ್ನತ ಶಿಕ್ಷಣ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ಈ ಯೋಜನೆಯ ಪ್ರಕಾರ, ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳಲ್ಲಿ ಬಡ್ಡಿರಹಿತ ಸಾಲ ದೊರೆಯಲಿದೆ ಜತೆಗೆ ಸಾಲ ಪಡೆಯುವ ವೇಳೆ ಅವರು ಆಧಾರವಾಗಿ ಸ್ವತ್ತು ಇಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ಬೋಧನಾ ಶುಲ್ಕ ಸೇರಿದಂತೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್‌ಗೆ ವ್ಯಯಿಸುವ ಇತರ ಖರ್ಚನ್ನೂ ಈ ಯೋಜನೆ ಭರಿಸಲಿದೆ.

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನಲ್ಲಿ ರ್‍ಯಾಂಕ್‌ ಪಡೆದಿರುವ 100 ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಮತ್ತು ಕೇಂದ್ರ ಸರ್ಕಾರ ನಡೆಸುವ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಬಹುದು.

ಸಾಂಸ್ಥಿಕ ಶ್ರೇಯಾಂಕದ ರ್‍ಯಾಂಕಿಂಗ್‌ ಅನುಸಾರ ಪ್ರತಿವರ್ಷ ಈ ಯೋಜನೆಯನ್ನೂ ಅಪ್ಡೇಟ್ ಮಾಡಲಾಗುವುದು. ಆರಂಭದಲ್ಲಿ 860 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ 22 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಹಣಕಾಸಿನ ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Comments


Top Stories

1/322
bottom of page