ಶ್ರೀನಗರದಲ್ಲಿ ಗ್ರೆನೇಡ್ ದಾಳಿ : ಐವರು ನಾಗರಿಕರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಮಾರುಕಟ್ಟೆಯ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು ಐವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಿ ಕೇಂದ್ರದ ಬಳಿ ದಾಳಿ ನಡೆದಿದೆ ಎಂದೂ ಅವರು ಹೇಳಿದ್ದಾರೆ. ಲಷ್ಕರ್-ಇ-ತಯಬಾ ಸಂಘಟನೆಯ ಪಾಕಿಸ್ತಾನ ಕಮಾಂಡರ್ನನ್ನು ಭದ್ರತಾ ಪಡೆ ಹೊಡೆದುರುಳಿಸಿದ ಒಂದು ದಿನದ ನಂತರ ಈ ದಾಳಿ ನಡೆದಿದೆ.
ಪೊಲೀಸರು ಮತ್ತು ಅರೆಸೇನಾ ಪಡೆ ಸ್ಥಳದಲ್ಲಿ ಬೀಡುಬಿಟ್ಟಿದ್ದು ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಏಕಾಏಕಿ ನಡೆದ ದಾಳಿಯಿಂದಾಗಿ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.










Comments